Saturday, May 17, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಈ ಹೊತ್ತಿನ ಪ್ರಮುಖ ಸುದ್ದಿಗಳು !

ಈ ಹೊತ್ತಿನ ಪ್ರಮುಖ ಸುದ್ದಿಗಳು !

  1. ರಾಜ್ಯಕ್ಕೆ ಭೇಟಿ ನೀಡಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದಾರೆ.
  2. ರಾಜ್ಯ ಹೈಕೋರ್ಟ್‍ಗೆ ನೂತನವಾಗಿ ನೇಮಕಗೊಂಡಿರುವ ಹತ್ತು ನ್ಯಾಯಮೂರ್ತಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
  3. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆಯ ಪ್ರಧಾನ ಸಭೆ UNGA ದ 76ನೇ ವಾರ್ಷಿಕ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದರ ಅಧ್ಯಕ್ಷತೆಯನ್ನು ಮಾಲ್ಡೀವ್ಸ್ ದೇಶದ ಅಬ್ದುಲ್ಲಾ ಶಾಹಿದ್ ವಹಿಸಲಿದ್ದಾರೆ.
  4. ದೆಹಲಿಯಲ್ಲಿ ಇಂದು ಭಾರತೀಯ ರೈತರ ರಸಗೊಬ್ಬರ ಸಹಕಾರ ಲಿಮಿಟೆಡ್-ಇಫ್ಕೋ ಸೇರಿದಂತೆ ಹಲವು ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಮೊದಲ ಸಹಕಾರ ಸಂಘಗಳ ಬೃಹತ್ ಸಮ್ಮೇಳನ ಉದ್ದೇಶಿಸಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಭಾಷಣ ಮಾಡಲಿದ್ದಾರೆ.
  5. “ದೇಶ ಕಂಡ ಅಸಾಮಾನ್ಯ ಸಾಧಕ, ನಾಡಿನ ಹೆಮ್ಮೆಯ ಗಾಯಕ, ಕಲಾವಿದ, ಪದ್ಮವಿಭೂಷಣ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಹತ್ತಕ್ಕೂ ಅಧಿಕ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ ಅವರ ಸಾಧನೆ ಚರಿತ್ರಾರ್ಹ.” _ಸಿ ಎಂ ಬಸವರಾಜ ಬೊಮ್ಮಾಯಿ.
  6. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಘೋಷಿಸಿದ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರೈತರ ಮಕ್ಕಳು ಈ ಯೋಜನೆಯ ಸದುಪಯೋಗ ಪಡೆಯಿರಿ.
  7. ದೇಶದ ಸುಸ್ಥಿರ ಆರ್ಥಿಕತೆಗಾಗಿ ಕೇಂದ್ರ ಸರ್ಕಾರ ಆರಂಭಿಸಿದ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗೆ ಇಂದು ಏಳು ವರ್ಷ ಪೂರೈಸಿದೆ. 2014ರ ಸೆಪ್ಟೆಂಬರ್ 25ರಂದು ಸರ್ಕಾರ ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೆ ಚಾಲನೆ ನೀಡಿತ್ತು.
  8. ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಮಾಣ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವರಾದ ಆರ್. ಅಶೋಕ, ಡಾ. ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೊರೋನಾ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಕ್ಟೋಬರ್ 1ರಿಂದ ಕೊರೋನಾ ಸೋಂಕು ಪ್ರಮಾಣ ಶೇಕಡ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಸಿನಿಮಾ ಮಂದಿರಗಳಲ್ಲಿ ಶೇಕಡ 100ರಷ್ಟು ಸೀಟು ಭರ್ತಿಗೆ ಅವಕಾಶ ಕಲ್ಪಿಸಲಾಗುವುದು. ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇಕಡ 50ರಷ್ಟು ಸೀಟುಗಳ ಭರ್ತಿಗೆ ಅವಕಾಶ ಕಲ್ಪಿಸಲಾಗುವುದು. ಶೇಕಡ 2ಕ್ಕಿಂತ ಹೆಚ್ಚು ಸೋಂಕು ಪ್ರಮಾಣ ಇರುವ ಜಿಲ್ಲೆಗಳಲ್ಲಿ ಸಿನಿಮಾ ಮಂದಿರಗಳನ್ನು ತೆರೆಯಲು ಅವಕಾಶ ಇಲ್ಲ. ಕನಿಷ್ಟ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶವಿದ್ದು, ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ನಿರ್ಬಂಧಿಸಲಾಗಿದೆ. ಅಕ್ಟೋಬರ್ 3ರಿಂದ ಇದೇ ಮಾನದಂಡ ಪಬ್ ಗಳಿಗೂ ಅನ್ವಯವಾಗುತ್ತದೆ ಎಂದರು. ರಾತ್ರಿ ಕರ್ಫ್ಯೂ ಅವಧಿಯನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನಿಗದಿಪಡಿಸಲಾಗುವುದು. 6ರಿಂದ 12ನೇ ತರಗತಿವರೆಗಿನ ತರಗತಿಗಳಿಗೆ ಶೇಕಡ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ರಾಜ್ಯದ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಕೋವಿಡ್-19 ಲಸಿಕೆ ಪ್ರಮಾಣ ಕಡಿಮೆ ಇರುವ ಯಾದಗಿರಿ, ರಾಯಚೂರು, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ಚುರುಕುಗೊಳಿಸಲಾಗುವುದು. ಸಚಿವರಾದ ಆರ್.ಅಶೋಕ ಮತ್ತು ಡಾ.ಕೆ.ಸುಧಾಕರ್ ಅವರು ಈ ಜಿಲ್ಲೆಗಳ ಲಸಿಕಾ ಅಭಿಯಾನದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದರು. ದಸರಾ ಆಚರಣೆ ಕುರಿತಂತೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
  9. ಹತ್ತು ದಿನಗಳ ಕಾಲ ನಡೆದ ವಿಧಾನಮಂಡಲದ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನ ಕುರಿತು ವಿವರ ನೀಡಿ, ಈ ಬಾರಿಯ ಕಲಾಪದಲ್ಲಿ ಧನ ವಿಧೇಯಕ ಸೇರಿದಂತೆ 17 ಮಸೂದೆಗಳನ್ನು ಮಂಡಿಸಲಾಗಿದ್ದು, ಮಹತ್ವದ ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದರು. ಒಟ್ಟು 21 ಸೂಚನೆಗಳನ್ನು ನಿಯಮ 69ರಡಿ ಸ್ವೀಕರಿಸಿ, 5 ಸೂಚನೆಗಳನ್ನು ಮಂಡಿಸಲಾಗಿದೆ. ಶೂನ್ಯವೇಳೆಯಲ್ಲಿ 21 ವಿವಿಧ ವಿಷಯಗಳನ್ನು ಚರ್ಚಿಸಿ, ಸದನಕ್ಕೆ ಒಂದು ಅರ್ಜಿಯನ್ನೂ ಸಹ ಸಲ್ಲಿಸಲಾಗಿದೆ. ಈ ಬಾರಿಯ ಅಧಿವೇಶನವು ಶೇಕಡ 90ಕ್ಕಿಂತ ಹೆಚ್ಚು ಫಲಪ್ರದವಾಗಿದೆ ಎಂದು ವಿವರ ನೀಡಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಅನೇಕ ತಜ್ಞರು, ಶಿಕ್ಷಣ ಪರಿಣಿತರು, ಸಮಾಜ ಸೇವಕರು ಸೇರಿದಂತೆ ಅನೇಕರ ಜೊತೆ ಸಮಾಲೋಚನೆ ನಡೆಸಿ, ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ ಎಂದರು. ಬಳಿಕ ವಿರೋಧ ಪಕ್ಷಗಳು, ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಕೋವಿಡ್-19 ಕುರಿತು ಒಂದು ವಾರ ಕಾಲ ಚರ್ಚೆಗೆ ಅವಕಾಶ ಕಲ್ಪಿಸಬೇಕು. ಅದಕ್ಕಾಗಿ ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕೊನೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಪರಿಷತ್ ಕಲಾಪದಲ್ಲಿ ನಿನ್ನೆ ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ಕುರಿತು ಚರ್ಚೆ ನಡೆಸಲಾಯಿತು. ನಿಯಮ 330 ಅಡಿ ನಡೆದ ಈ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳು ಪದೇ ಪದೇ ನಡೆಯುತ್ತಿವೆ. ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣ ಹೆಚ್ಚಿಸಲು ಕಠಿಣ ಕಾನೂನು ತರುವ ಜೊತೆಗೆ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು. ಈ ಸಂಬಂಧ ಸರ್ಕಾರ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಂಡಿದೆ ಎಂದು ಸದನಕ್ಕೆ ತಿಳಿಸಿದರು. ನಂತರ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ಸಂರಕ್ಷಣೆ ವಿಧೇಯಕ-2021 ಅನ್ನು ಮುಖ್ಯಮಂತ್ರಿ ಅವರ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಂಡಿಸಿ, ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಈ ವಿಧೇಯಕ ತರಲಾಗಿದೆ ಎಂದರು. ವಿಧೇಯಕಕ್ಕೆ ಧ್ವನಿಮತದ ಮೂಲಕ ಅಂಗೀಕಾರ ದೊರೆಯಿತು. (ಕೃಪೆ: ಡಿಡಿ ಚಂದನ)
  10. ಬೆಂಗಳೂರು: ಹೊರವಲಯದ ಕನಕಪುರ ರಸ್ತೆಯಲ್ಲಿರುವ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ನಿನ್ನೆ ಜಾಗತಿಕ ಸವಾಲುಗಳು ಹಾಗೂ ನಮ್ಮ ಜವಾಬ್ದಾರಿ ವಿಷಯ ಕುರಿತು ರಾಷ್ಟ್ರ ಮಟ್ಟದ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌, ಆಶ್ರಮದ ಸಂಸ್ಥಾಪಕ ರವಿಶಂಕರ್‍ ಗುರೂಜಿ, ಅಹಿಂಸಾ ವಿಶ್ವ ಭಾರತಿ ಸಂಸ್ಥಾಪಕ ಲೋಕೇಶ್‌ ಸೇರಿ ಹಲವರು ಭಾಗವಹಿಸಿದ್ದರು. ಬಳಿಕ ರಾಜ್ಯಪಾಲ ಥಾವರ್‍ ಚಂದ್ ಗೆಹ್ಲೋಟ್‌, ಜಾಗತಿಕ ಮಟ್ಟದಲ್ಲಿ ದೇಶ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹಿಂಸೆ ಹಾಗೂ ಆತಂಕವಾದ ರಾಷ್ಟ್ರಮಟ್ಟದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇತ್ತೀಚೆಗೆ ಕೋವಿಡ್‌ ಸಹ ಜಾಗತಿಕ ಮಟ್ಟದಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದರ ಜೊತೆಗೆ ಜಾಗತಿಕ ತಾಪಮಾನ ಇಡೀ ರಾಷ್ಟ್ರದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ದೇಶದ ಪ್ರಜ್ಞಾವಂತ ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜವನ್ನು ಒಳ್ಳೆಯ ದಿಕ್ಕಿನತ್ತ ನಡೆಸುವಂತಹ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ರವಿಶಂಕರ್‍ ಗುರೂಜಿ, ಅಹಿಂಸಾ ವಿಶ್ವ ಭಾರತಿ ಸಂಸ್ಥಾಪಕ ಲೋಕೇಶ್‌ ಗುರೂಜೀ ಅವರು ಅಹಿಂಸಾ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಜೈನ ಧರ್ಮದ ಕೊಂಡಿಯಾಗಿದ್ದಾರೆ.ಅವರೊಂದಿಗೆ ಎಲ್ಲರೂ ಕೈಜೋಡಿಸಿ ಸಮಾಜದಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news