ಬೆಂಗಳೂರು: ಇಂದಿನಿಂದ ಆರಂಭವಾದ ಮೂರು ದಿನಗಳ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ – ಇನ್ವೆಸ್ಟ್ ಕರ್ನಾಟಕ ಶೃಂಗಸಭೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನವೋದ್ಯಮಗಳ ಶ್ರೇಯಾಂಕದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ. ಇದರ ಜೊತೆಗೆ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲೂ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹಾದಿಯಲ್ಲಿದೆ. ಇದು ಮತ್ತಷ್ಟು ಬೆಳವಣಿಗೆಗೆ ಪೂರಕವಾಗಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ನಂತರ ರಾಜ್ಯದಲ್ಲಿ ಆರ್ಥಿಕ ಚೇತರಿಕೆ ಕಾಣುತ್ತಿದೆ. ಕೇಂದ್ರ – ರಾಜ್ಯ ಸರ್ಕಾರದಲ್ಲಿ ಒಂದೇ ಪಕ್ಷದ ಡಬಲ್ ಇಂಜಿನ್ ಸರ್ಕಾರ ಇರುವುದರಿಂದ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ಹೂಡಿಕೆದಾರರಿಗೆ ಅನುಕೂಲವಾಗುವ ಎಲ್ಲ ಮೂಲಸೌಕರ್ಯಗಳನ್ನು ರಾಜ್ಯ ಸರ್ಕಾರ ಕಲ್ಪಿಸಲಿದೆ. ಕೋವಿಡ್ ನಂತರ ದೇಶದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿರುವುದು ಕೈಗಾರಿಕೋದ್ಯಮಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚು ಮಾಡಿದೆ ಎಂದರು. ಸ್ವಾತಂತ್ರ್ಯೋತ್ಸವ ಅಮೃತ ಕಾಲದಲ್ಲಿ ನಾವಿದ್ದೇವೆ. ನವಭಾರತ ನಿರ್ಮಾಣ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದು ರಾಜ್ಯ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ಬಂಡವಾಳ ಹೂಡಿಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೂಡಿಕೆದಾರರಿಗೆ ಕರೆ ನೀಡಿದರು. ಸಮಾವೇಶದಿಂದ 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹರಿದುಬರುವ ಸಾಧ್ಯತೆ ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ. ಮುಂದಿನ ಐದು ವರ್ಷಗಳ ಬೆಳವಣಿಗೆಗೆ ಭದ್ರ ಬುನಾದಿ ಹಾಕುವುದಾಗಿ ತಿಳಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹೂಡಿಕೆದಾರರಿಗೆ ಪೂರಕವಾದ ವಾತಾವರಣಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಿಕೊಟ್ಟಿದೆ. ಐದು ಲಕ್ಷ ಕೋಟಿ ರೂಪಾಯಿ ಬಂಡವಾಳ ಹರಿದು ಬರುವ ಅಂದಾಜು ರಾಜ್ಯ ಸರ್ಕಾರದ್ದು, ಆದರೆ ಈಗಿನ ಉದ್ಯಮಿಗಳ ಪ್ರತಿಕ್ರಿಯೆ ನೋಡಿದರೆ ಏಳೂವರೆ ಲಕ್ಷ ಕೋಟಿ ರೂಪಾಯಿ ಆಗುವ ಸಾಧ್ಯತೆ ಇದೆ. ಮೊದಲ ದಿನವೇ 3 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ಕೊಳವೆ ಮೂಲಕ 30 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 70 ಸಾವಿರ ಕೋಟಿ ರೂಪಾಯಿ ಯೋಜನೆಗಳು ರಾಜ್ಯದಲ್ಲಿ ಪ್ರಗತಿಯಲ್ಲಿವೆ. ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳ ಪೈಕಿ ಒಟ್ಟಾರೆ ಒಂದು ಲಕ್ಷ ಕೋಟಿಗೂ ಹೆಚ್ಚು ಕಾಮಗಾರಿಗಳು ರಾಜ್ಯದಲ್ಲಿ ನಡೆಯುತ್ತಿವೆ. ರೈಲ್ವೆ ಯೋಜನೆಗಳಲ್ಲಿ ರಾಜ್ಯಕ್ಕೆ ಬರುತ್ತಿದ್ದ ಅನುದಾನ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ , ಬಂಡವಾಳ ಹೂಡಿಕೆ ಮಾಡಲು ಕರ್ನಾಟಕ ಪ್ರಶಸ್ತವಾದ ತಾಣ . ಸುಗಮ ಉದ್ಯಮಕ್ಕೆ ಅನುಕೂಲವಾಗಲು ರಾಜ್ಯ ಸರ್ಕಾರ ಎಲ್ಲ ರೀತಿಯ ಅನುಕೂಲ ಕಲ್ಪಿಸಿದೆ. ಕರ್ನಾಟಕ ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಇದರ ಜೊತೆಗೆ ಹೂಡಿಕೆದಾರರಿಗೆ ಮೂಲಸೌಕರ್ಯ ಕಲ್ಪಿಸಿರುವುದು ಬಂಡವಾಳ ಹೂಡಿಕೆದಾರರನ್ನು ಮತ್ತಷ್ಟು ಆಕರ್ಷಿಸಲಿದೆ ಎಂದು ತಿಳಿಸಿದರು.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವ ರಾಜೀವ್ ಚಂದ್ರಶೇಖರ್, ಕೋವಿಡ್ ನಂತರ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆ ಚೇತರಿಕೆಯ ಹಾದಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಮುಂದಿನ 10 ವರ್ಷ ಭಾರತದ ದಶಕ ಎಂದು ಪ್ರಧಾನಿ ಈಗಾಗಲೇ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಇನ್ವೆಸ್ಟ್ ಕರ್ನಾಟಕದ ಮೂಲಕ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಅವಕಾಶವಾಗಲಿದೆ. ಉದ್ಯಮಿಗಳಿಗೆ ಪೂರಕವಾಗುವ ಸ್ನೇಹಿ ವಾತಾವರಣವನ್ನು ಕಲ್ಪಿಸಲಾಗುವುದು. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಬಂಡವಾಳ ಹೂಡಿಕೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆಬೇರೆ ನಗರಗಳಲ್ಲೂ ಕೂಡ ಮೂಲಸೌಕರ್ಯ ಕಲ್ಪಿಸುವ ಮೂಲಕ ಎರಡು ಮತ್ತು 3ನೇ ಹಂತದ ನಗರಗಳಿಗೂ ಉದ್ಯಮಗಳನ್ನು ಆಕರ್ಷಿಸಲು ಒತ್ತು ನೀಡಲಾಗುವುದು ಎಂದು ಹೇಳಿದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಸಚಿವರು, ರಾಜ್ಯ ಸಚಿವರು ಉಪಸ್ಥಿತರಿದ್ದರು.
_CLICK to Follow-Support us on DailyHunt